top of page

ಅಧಿವೇಶನದ ಮಧ್ಯೆಯೇ ದಿಢೀರ್​ ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ

  • Writer: new waves technology
    new waves technology
  • Dec 18, 2024
  • 1 min read

ವಿಜಯೇಂದ್ರ ಅವರು ಸುಮಾರು 15 ನಿಮಿಷಗಳ ಕಾಲ ಮೋದಿ ಜೊತೆ ಚರ್ಚಿಸಿದ್ದು, ರಾಜ್ಯದಲ್ಲಿನ ಭಿನ್ನಮತೀಯ ಚಟುವಟಿಕೆ, ಯತ್ನಾಳ್ ಮತ್ತು ತಂಡದಿಂದ ಪಕ್ಷಕ್ಕಾಗುತ್ತಿರುವ ಆಗುತ್ತಿರುವ ಮುಜುಗರವನ್ನು ಮೋದಿ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.

ನವದೆಹಲಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ದಿಢೀರ್ ದೆಹಲಿ ತೆರಳಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ರಾಜ್ಯದ ಮೂರು ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಿದ ನಂತರ ಬಿವೈ ವಿಜಯೇಂದ್ರ ಅವರ ವಿರೋಧಿ ಬಣ ಬಹಿರಂಗವಾಗಿಯೇ ರಾಜ್ಯಾಧ್ಯಕ್ಷರ ವಿರುದ್ಧ ಅಸಮಾಧಾನವನ್ನ ಹೊರ ಹಾಕುತ್ತಿದೆ. ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡಬೇಕೆಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಪಟ್ಟು ಹಿಡಿದಿದ್ದು, ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಗುಸು ಗುಸು ಕೇಳಿ ಬರುತ್ತಿದೆ.

ಜನವರಿಯಲ್ಲಿ ಮಹತ್ವದ ಬದಲಾವಣೆಗಳು ಆಗಲಿದೆ ಎಂದು ಯತ್ನಾಳ್​ ಟೀಂ ಹೇಳುತ್ತಿದೆ. ಮತ್ತೊಂದೆಡೆ ಯಾವುದೇ ಶೋಕಾಸ್ ನೋಟಿಸಿಗೂ ಬಗ್ಗದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಟೀಂ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆಯೂ, ಯಡಿಯೂರಪ್ಪ ಕುಟುಂಬದ ವಿರುದ್ದ ವಾಗ್ದಾಳಿ ಮುಂದುವರಿಸಿದೆ.


ಈ ಎಲ್ಲಾ ಬೆಳವಣಿಗೆಗಳ ಮಧ್ಯ ವಿಜಯೇಂದ್ರ ಅವರು ಇಂದು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದು ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

ವಿಜಯೇಂದ್ರ ಅವರು ಸುಮಾರು 15 ನಿಮಿಷಗಳ ಕಾಲ ಮೋದಿ ಜೊತೆ ಚರ್ಚಿಸಿದ್ದು, ರಾಜ್ಯದಲ್ಲಿನ ಭಿನ್ನಮತೀಯ ಚಟುವಟಿಕೆ, ಯತ್ನಾಳ್ ಮತ್ತು ತಂಡದಿಂದ ಪಕ್ಷಕ್ಕಾಗುತ್ತಿರುವ ಡ್ಯಾಮೇಜ್, ಭಿನ್ನರ ಹೇಳಿಕೆಯಿಂದಾಗಿ, ಕಾಂಗ್ರೆಸ್ ಸರ್ಕಾರದ ಎದುರು ಆಗುತ್ತಿರುವ ಮುಜುಗರವನ್ನು ಮೋದಿ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಯತ್ನಾಳ್ ಬಣ ಪಟ್ಟು ಹಿಡಿದಿದ್ದು, ಹೈಕಮಾಂಡ್ ಭೇಟಿಗೆ ಸಮಯ ಸಿಗದಿದ್ದಕ್ಕೆ ಯತ್ನಾಳ್ ನೇತೃತ್ವದ ರೆಬೆಲ್ಸ್​ ಟೀಂ ವಾಪಸ್ ಆಗಿತ್ತು. ಆದರೆ ಇದೀಗ ದಿಢೀರ್ ವಿಜಯೇಂದ್ರ ಮೋದಿಯವರನ್ನು ಭೇಟಿಯಾಗುವ ಮೂಲಕ ಪಕ್ಷದ ವರಿಷ್ಠರು ನನ್ನ ಪರವಾಗಿದ್ದಾರೆ ಎಂಬ ಸಂದೇಶವನ್ನು ವಿರೋಧಿಗಳಿಗೆ ರವಾನಿಸಿದ್ದಾರೆ ಎನ್ನಲಾಗಿದೆ.

Commentaires


bottom of page