top of page

ಭಾರಿ ಚಳಿಗೆ ಸಿದ್ಧರಾಗಿ: ಕರ್ನಾಟಕದಲ್ಲಿ 3 ದಿನ ಶೀತಗಾಳಿ; ತಾಪಮಾನ 2-4 ಡಿಗ್ರಿ ಕುಸಿತ; ಹವಾಮಾನ ಇಲಾಖೆ ಎಚ್ಚರಿಕೆ

  • Writer: new waves technology
    new waves technology
  • Dec 18, 2024
  • 2 min read

ಮುಂದಿನ 3 ದಿನ ಶೀತಗಾಳಿ ಬೀಸುವ ಸಾಧ್ಯತೆ ಇದ್ದು, ಮುಂದಿನ ಮೂರು ದಿನಗಳವರೆಗೆ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ "ಸಾಮಾನ್ಯಕ್ಕಿಂತ ಕಡಿಮೆ" ಇರಲಿದೆ..

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಬೆನ್ನಲ್ಲೇ ಇತ್ತ ಕರ್ನಾಟಕ ರಾಜ್ಯದಲ್ಲಿ ತಾಪಮಾನ ಕುಸಿತವಾಗಿದ್ದು, ಮುಂದಿನ 3 ದಿನಗಳ ಕಾಲ ಶೀತಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಬುಧವಾರ ಎಚ್ಚರಿಕೆ ನೀಡಿದೆ.

ರಾಜ್ಯದಲ್ಲಿ ತಾಪಮಾನ ಗಣನೀಯವಾಗಿ ಕುಸಿತವಾಗಿದ್ದು, ಮುಂದಿನ ದಿನಗಳಲ್ಲಿ ತಾಪಮಾನ 2 ರಿಂದ 4 ಡಿಗ್ರಿಗಳ ವರೆಗೂ ಕುಸಿಯುವ ಸಾಧ್ಯತೆ ಇದೆ. ಮುಂದಿನ 3 ದಿನ ಶೀತಗಾಳಿ ಬೀಸುವ ಸಾಧ್ಯತೆ ಇದ್ದು, ಮುಂದಿನ ಮೂರು ದಿನಗಳವರೆಗೆ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ "ಸಾಮಾನ್ಯಕ್ಕಿಂತ ಕಡಿಮೆ" ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬುಧವಾರ ತಿಳಿಸಿದೆ.

ಪ್ರಮುಖವಾಗಿ ರಾಜ್ಯದ ಬೀದರ್, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಶೀತಗಾಳಿ ಮುಂದುವರಿಯುವ ಸಾಧ್ಯತೆ ಇದ್ದು, ಡಿಸೆಂಬರ್ 18-22 ರವರೆಗೆ ರಾಜ್ಯಾದ್ಯಂತ ಶುಷ್ಕ ಹವಾಮಾನ ಮುಂದುವರಿಯುವ ಮುನ್ಸೂಚನೆ ಇದೆ. ಬೀದರ್, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಶೀತಗಾಳಿ ವಾತಾವರಣ ನಿರೀಕ್ಷಿಸಲಾಗಿದೆ.

ಉತ್ತರ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರುತ್ತದೆ. ಕರ್ನಾಟಕದ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಡಿಸೆಂಬರ್ 20 ರವರೆಗೆ ಮಂಜು ಆವರಿಸಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


ರೆಡ್‌ ಅಲರ್ಟ್‌ ಘೋಷಿಸಿದ ಜಿಲ್ಲಾಡಳಿತ

ಇನ್ನು ಮುಂದಿನ ಮೂರ್ನಾಲ್ಕು ದಿನಗಳವರೆಗೆ ಬೀದರ್‌ ಜಿಲ್ಲೆಯಾದ್ಯಂತ ಶೀತಗಾಳಿ ಬೀಸಲಿದ್ದು, ಸಾಮಾನ್ಯ ತಾಪಮಾನಕ್ಕಿಂತ 5ರಿಂದ 6 ಡಿಗ್ರಿ ಸೆಲ್ಸಿಯಸ್‌ ಕಡಿಮೆ ಇರಲಿದೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಡಳಿತ ರೆಡ್‌ ಅಲರ್ಟ್‌ ಘೋಷಿಸಿದೆ. 'ಸೂರ್ಯೋದಯಕ್ಕಿಂತ ಮುಂಚೆ, ಸೂರ್ಯಾಸ್ತದ ನಂತರ ವಾಕಿಂಗ್‌ ಮಾಡುವವರು ಎಚ್ಚರ ವಹಿಸಬೇಕು. ದ್ವಿಚಕ್ರ ವಾಹನಗಳಲ್ಲಿ ಹೊರಗೆ ಓಡಾಡಬಾರದು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಮನವಿ ತಿಳಿಸಿದ್ದಾರೆ.

ಅಂತೆಯೇ ಡಿಸೆಂಬರ್ 23 ರಿಂದ 24 ರವರೆಗೆ ದಕ್ಷಿಣ ಒಳನಾಡು ಅಂದರೆ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ "ಲಘು ಮಳೆ" ಬೀಳುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಈ ಅವಧಿಯಲ್ಲಿ, ಕರಾವಳಿ ಕರ್ನಾಟಕ, ಉತ್ತರ ಒಳನಾಡಿನ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯುವ ನಿರೀಕ್ಷೆಯಿದೆ ಎಂದು ಹೇಳಿದೆ.


ತಾಪಮಾನದಲ್ಲಿ ಕ್ರಮೇಣ ಇಳಿಕೆ

"ಬೀದರ್, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳವರೆಗೆ ಶೀತಲ ಅಲೆಯ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರುತ್ತದೆ.

ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ಮತ್ತಷ್ಟು ಇಳಿಕೆಯಾಗುವ ನಿರೀಕ್ಷೆಯಿದ್ದು, ಮುಂದಿನ ಮೂರು ದಿನಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್ ನಷ್ಟು ಕಡಿಮೆಯಾಗಲಿದೆ. ನಂತರ ದಕ್ಷಿಣ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ಕ್ರಮೇಣ ಇಳಿಕೆ ಕಂಡುಬರುತ್ತದೆ ಎಂದು ಐಎಂಡಿ ಹೇಳಿಕೆಯಲ್ಲಿ ತಿಳಿಸಿದೆ.

ಕರಾವಳಿ ಕರ್ನಾಟಕದಾದ್ಯಂತ ಕನಿಷ್ಠ ತಾಪಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಯನ್ನು ನಿರೀಕ್ಷಿಸಲಾಗುವುದಿಲ್ಲ. ಇಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹೇಳಲಾಗಿದೆ.

ಚಳಿ ಪ್ರಮಾಣ ಹೆಚ್ಚಳ ಸಾಧ್ಯತೆ

ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಹವಾಮಾನ ಸಂಪೂರ್ಣ ಬದಲಾಗಿದೆ. ಚಳಿಯ ಪ್ರಮಾಣ ಜಾಸ್ತಿ ಆಗಿದೆ. ಸದ್ಯ ಬೀದರ್‌ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 10 ಡಿಗ್ರಿ ಸೆಲ್ಸಿಯಸ್‌ ಇದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಇದರಲ್ಲಿ 5ರಿಂದ 6 ಡಿಗ್ರಿ ಸೆಲ್ಸಿಯಸ್‌ ಕಡಿಮೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗಬಹುದು.

コメント


bottom of page