NEET, CBSE ಅಕ್ರಮಕ್ಕೆ ಆಕ್ರೋಶ: ಜೂನ್ 13ರ ಒಳಗೆ ಪ್ರಧಾನ್ ಕೆಳಗಿಳಿಯದಿದ್ದರೆ ಪ್ರತೀ ರಾಜ್ಯದಲ್ಲೂ ಪ್ರತಿಭಟನೆ- Cockroach Janata Party ಎಚ್ಚರಿಕೆ
- new waves technology
- 2 days ago
- 1 min read

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜೂನ್ 13, 2026ರ ಒಳಗೆ ರಾಜೀನಾಮೆ ನೀಡದಿದ್ದರೆ ದೇಶದ ವಿವಿಧ ರಾಜ್ಯಗಳು ಮತ್ತು ನಗರಗಳಲ್ಲಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವುದಾಗಿ ಕಾಕ್ರೋಚ್ ಜನತಾ ಪಾರ್ಟಿ (CJP) ಎಚ್ಚರಿಕೆ ನೀಡಿದೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ವೀಡಿಯೋ ಸಂದೇಶದ ಮೂಲಕ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಎಚ್ಚರಿಕೆ ನೀಡಿದ್ದಾರೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜೂನ್ 13ರೊಳಗೆ ರಾಜೀನಾಮೆ ನೀಡದಿದ್ದರೆ ದೇಶದ ವಿವಿಧ ರಾಜ್ಯಗಳು ಮತ್ತು ನಗರಗಳಲ್ಲಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ನಡೆದಿರುವ ಅಕ್ರಮಗಳ ಹೊಣೆ ಹೊತ್ತು ಪ್ರಧಾನ್ ಅವರು ಸ್ಥಾನ ತ್ಯಜಿಸಬೇಕು. ಜೂನ್ 13ರೊಳಗೆ ರಾಜೀನಾಮೆ ಸಲ್ಲಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
“ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡದಿದ್ದರೆ ನಾನು ಸ್ವತಃ ವಿವಿಧ ರಾಜ್ಯಗಳು ಮತ್ತು ನಗರಗಳಿಗೆ ತೆರಳಿ ಪ್ರತಿಭಟನೆಗಳಲ್ಲಿ ಭಾಗವಹಿಸುತ್ತೇನೆ. ಅವರ ರಾಜೀನಾಮೆಗಾಗಿ ರಾಷ್ಟ್ರವ್ಯಾಪಿ ಒತ್ತಡ ಸೃಷ್ಟಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯಮಟ್ಟದ ಪ್ರತಿಭಟನೆಗಳ ಬಳಿಕವೂ ಯಾವುದೇ ಕ್ರಮ ಕೈಗೊಳ್ಳದಿದ್ದರೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತೊಮ್ಮೆ ಬೃಹತ್ ಪ್ರತಿಭಟನೆ ನಡೆಸಲಾಗುವುದು. ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಒಂದಾಗಿ ಸೇರಿ ಶಾಂತಿಯುತ ಹೋರಾಟ ನಡೆಸಲಿದ್ದಾರೆ.
ಒಂದು ಕೋಟಿಗೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಹಾಳಾಗಲು ಕಾರಣವಾದ ಘಟನೆಗಳಿಗೆ ನೈತಿಕ ಹೊಣೆ ಹೊತ್ತು ಸಚಿವರು ರಾಜೀನಾಮೆ ನೀಡಬೇಕು. ಅವರು ಸ್ಥಾನ ತ್ಯಜಿಸುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.
ಇತ್ತೀಚೆಗೆ ನೇಪಾಳ ಮತ್ತು ಬಾಂಗ್ಲಾದೇಶದಲ್ಲಿ ನಡೆದ ಯುವಜನರ ಪ್ರತಿಭಟನೆಗಳೊಂದಿಗೆ ಸಿಜೆಪಿ ಚಳವಳಿಯನ್ನು ಹೋಲಿಸಲಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಬಲವಾಗಿದ್ದು, ತಮ್ಮ ಹೋರಾಟ ಸಂಪೂರ್ಣ ಶಾಂತಿಯುತವಾಗಿರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
“ನಮ್ಮ ಚಳವಳಿಯನ್ನು ನೆರೆಯ ರಾಷ್ಟ್ರಗಳ ಪ್ರತಿಭಟನೆಗಳೊಂದಿಗೆ ಹೋಲಿಸುವುದು ಸರಿಯಲ್ಲ. ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆ ಸಂಪೂರ್ಣ ಶಾಂತಿಯುತವಾಗಿತ್ತು. ದೇಶದ ವಿವಿಧ ಭಾಗಗಳಿಂದ ಯುವಕರು ಭಾಗವಹಿಸಿದ್ದರು. ಮುಂದಿನ ದಿನಗಳಲ್ಲಿ ಇನ್ನಷ್ಟು ದೊಡ್ಡ ಮಟ್ಟದ ಪ್ರತಿಭಟನೆಗಳು ನಡೆಯಲಿವೆ. ಆದರೆ, ಅವುಗಳೂ ಶಾಂತಿಯುತವಾಗಿಯೇ ಇರುತ್ತವೆ ಎಂದು ಹೇಳಿದ್ದಾರೆ.
ಮೇ ತಿಂಗಳಲ್ಲಿ ಆನ್ಲೈನ್ ವ್ಯಂಗ್ಯಾತ್ಮಕ ಅಭಿಯಾನವಾಗಿ ಆರಂಭವಾದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಇತ್ತೀಚೆಗೆ ನವದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಿತ್ತು. ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ನಡೆದ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರು ಜಿರಳೆ (Cockroach) ಮುಖವಾಡಗಳನ್ನು ಧರಿಸಿ, ವಿವಿಧ ಘೋಷಣೆಗಳನ್ನು ಕೂಗಿ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದರು.





Comments